
ಹುಬ್ಬಳ್ಳಿ: ರಾಜ್ಯ ಸರ್ಕಾರ ನುಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಗೃಹ ಜ್ಯೋತಿ, ಶಕ್ತಿ, ಗೃಹ ಲಕ್ಷ್ಮಿ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿಗೆ ಬಲ ತುಂಬಿವೆ ಎಂದು ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡಿಮಠ ಹೇಳಿದರು.
ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ನುಡಿದಂತೆ ನಡೆದ ಯಾತ್ರೆ’ಯ ಏಳನೇ ದಿನವಾದ ಶನಿವಾರ, ಯಾತ್ರೆ ಎಬಿಎಮ್ ತೆಲುಗು ಬ್ಯಾಪ್ಟಿಸ್ಟ್ ಚರ್ಚ್ ಪ್ರಾರ್ಥನಾ ಮಂದಿರದಿಂದ ಆರಂಭವಾಯಿತು. ಯಾತ್ರೆಗೆ ರಜತ್ ಉಳ್ಳಾಗಡಿಮಠ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಆರತಿ ಬೆಳಗಿ ಭವ್ಯ ಸ್ವಾಗತ ಕೋರಿದರು.
ಗಲ್ಲಿ ಗಲ್ಲಿಗಳಲ್ಲಿ ನಡೆದ ಈ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನತೆಗೆ ಮಾಹಿತಿ ನೀಡಲಾಯಿತು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಜತ್ ಉಳ್ಳಾಗಡಿಮಠ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅಧಿಕಾರಕ್ಕೆ ಬಂದ ಬಳಿಕ ಯಾವುದೇ ವಿಳಂಬವಿಲ್ಲದೆ ಅವುಗಳನ್ನು ರಾಜ್ಯವ್ಯಾಪಿಯಾಗಿ ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ನಾಯಕರು ಟೀಕೆ ಟಿಪ್ಪಣಿ ಮಾಡಿದರು. ಆದರೆ ಇಂದು ಗ್ಯಾರಂಟಿಗಳ ಲಾಭದಿಂದ ಅನೇಕ ಮಹಿಳೆಯರು ಗೃಹ ಬಳಕೆ ಸಾಮಗ್ರಿ ಖರೀದಿ ಮಾಡಿಕೊಳ್ಳಲು ಹಾಗೂ ವೈಯಕ್ತಿಕ ಸಾಲಗಳನ್ನು ತೀರಿಸಿಕೊಳ್ಳಲು ಸಾಧ್ಯವಾಗಿದೆ” ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಸಂದರ್ಭದಲ್ಲೇ ಬಿಜೆಪಿಯವರು ಅವು ಸುಳ್ಳು ಎಂದು ಟೀಕಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಬಿಜೆಪಿ ಪಕ್ಷ ಶ್ರೀಮಂತರ ಪರವಾದರೆ, ಕಾಂಗ್ರೆಸ್ ಪಕ್ಷ ಎಂದೆಂದಿಗೂ ದಲಿತರು, ಬಡವರು ಹಾಗೂ ಶ್ರಮಜೀವಿಗಳ ಪರವಾಗಿದೆ ಎಂಬುದಕ್ಕೆ ಪಂಚ ಗ್ಯಾರಂಟಿಗಳೇ ಸಾಕ್ಷಿ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಸುವರ್ಣಾ ಕಲಕುಂಟ್ಲಾ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದರು.
‘ನುಡಿದಂತೆ ನಡೆದ ಯಾತ್ರೆ’ ಮುಂದುವರಿದಿದ್ದು, ಕ್ಷೇತ್ರದ ಜನರಿಂದ ಹೆಚ್ಚುತ್ತಿರುವ ಬೆಂಬಲ ಕಾಂಗ್ರೆಸ್ ಪಕ್ಷದ ಕಾರ್ಯಕ್ಕೆ ಶಕ್ತಿ ತುಂಬುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.




