
ಕುಂದಗೋಳ: ದೇಶ ಕಂಡ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ (H. D. DeveGowda) ಅವರ 93ನೇ ಜನ್ಮದಿನದ ಅಂಗವಾಗಿ ಕುಂದಗೋಳ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿ, ತಾಲೂಕು ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಜೆಡಿಎಸ್ ತಾಲೂಕು ಉಸ್ತುವಾರಿ ಹಾಗೂ ಹೈಕೋರ್ಟ್ ವಕೀಲ ವಿ.ಸಿ. ಭದ್ರಗೌಡರ ನೇತೃತ್ವದಲ್ಲಿ ಮೊದಲು ಗಾಳಿ ಮರೇಮ್ಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವೇಗೌಡರ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸಲಾಯಿತು.
https://www.facebook.com/share/r/19vBmUhrMj/

ಅನಂತರ ಕುಂದಗೋಳ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಜೆಡಿಎಸ್ ಮುಖಂಡರು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಸಮ್ಮುಖದಲ್ಲಿ ದಾಖಲಾದ ರೋಗಿಗಳಿಗೆ ಹಣ್ಣು, ಹಂಪಲು, ಬಿಸ್ಕೇಟ್ ಹಾಗೂ ಬ್ರೆಡ್ ವಿತರಿಸಿದರು. ಇದೇ ವೇಳೆ ರೋಗಿಗಳ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಉಸ್ತುವಾರಿ ವಿ.ಸಿ. ಭದ್ರಗೌಡರ, “ಮಾಜಿ ಪ್ರಧಾನಿ ದೇವೇಗೌಡರು ರೈತಪರ, ಜನಪರ ಆಡಳಿತದ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಅವರ ಜನ್ಮದಿನವನ್ನು ಸಮಾಜಮುಖಿ ಸೇವಾ ಕಾರ್ಯಕ್ರಮಗಳ ಮೂಲಕ ಆಚರಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕುಂದಗೋಳ ತಾಲೂಕು ಜೆಡಿಎಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.




