ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳ ಬೆಳವಣಿಗೆ ಅತ್ಯವಶ್ಯ: ಡಾ. ಲಿಂಗರಾಜ್ ರಾಮಾಪುರ

ಧಾರವಾಡ: ಸೋನಿಯಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಯರಿಕೊಪ್ಪ ಗ್ರಾಮದಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಡಾ. ಲಿಂಗರಾಜ್ ರಾಮಾಪುರ ಅವರು “ರಾಷ್ಟ್ರೀಯ ಸೇವೆ ಎಂದರೆ ದೇಶದ ಸೇವೆ” ಎಂದು ತಿಳಿಸಿದರು. ಎನ್ಎಸ್ಎಸ್ ಯೋಜನೆ ದೇಶದ ಯುವಜನತೆಗೆ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ಅವರು ಹೇಳಿದರು. ಸಮಾಜದ ಅಭಿವೃದ್ಧಿಗೆ ಯುವಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಅಭಿವೃದ್ಧಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವುದು ಅತಿ ಮುಖ್ಯ. ಗ್ರಾಮಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ಎನ್ಎಸ್ಎಸ್ ಸ್ವಯಂಸೇವಕರು ಪ್ರಮುಖ ಪಾತ್ರವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಪ್ರಕಾಶ್ ಜೋಗಿನ್ ವಹಿಸಿದ್ದರು. ಏರಿಕೊಪ್ಪ ಗ್ರಾಮದ ಗಣ್ಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಾಲಿಗುಡಿ ಪತ್ರಿಕೆಯ ಸಂಪಾದಕರಾದ ಡಾ. ಲಿಂಗರಾಜ್ ರಾಮಾಪುರ ಹಾಗೂ ಕಿರೇಸೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರನ್ನು ವೇದಿಕೆಯಲ್ಲಿ ರಾಜ್ ಪಾಲಕ್, ಎನ್ಎಸ್ಎಸ್ ಅಧಿಕಾರಿಗಳಾದ ಪ್ರೊ. ಗಂಗಾಧರ ಮರಳಿಹಳ್ಳಿ ಹಾಗೂ ಊರಿನ ಗಣ್ಯರು ಗೌರವಿಸಿದರು.
ನಂತರ ಎನ್ಎಸ್ಎಸ್ ಸ್ವಯಂಸೇವಕರು ಹಾಗೂ ಗ್ರಾಮ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮವು ಗ್ರಾಮಸ್ಥರಲ್ಲಿ ಹೊಸ ಉತ್ಸಾಹವನ್ನುಂಟುಮಾಡಿತು.




