ಧಾರವಾಡ: ಯರಿಕೊಪ್ಪ ಗ್ರಾಮದಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಧಾರವಾಡ: ಇಲ್ಲಿನ ಸೋನಿಯಾ ಪದವಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವತಿಯಿಂದ ಯರಿಕೊಪ್ಪ ಗ್ರಾಮದಲ್ಲಿ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಅಂಗವಾಗಿ ಪರಿಸರ ಪ್ರಜ್ಞೆ, ಸ್ವಚ್ಛತೆ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮದಲ್ಲಿ ಜಾಥಾ ಆಂದೋಲನವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಗಂಗಾಧರ ಎಸ್. ಮರಳಿಹಳ್ಳಿ ಅವರ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ಮತ್ತು ಕಾಲೇಜಿನ ಉಪನ್ಯಾಸಕರು ಯಶಸ್ವಿಯಾಗಿ ಆಯೋಜಿಸಿದರು. ಜಾಥಾ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ಪರಿಸರ ಸಂರಕ್ಷಣೆ, ಸ್ವಚ್ಛತೆಯ ಮಹತ್ವ ಹಾಗೂ ಕಾನೂನು ಸಲಹೆಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಸಂಜೆ ವೇಳೆ ಎನ್ಎಸ್ಎಸ್ ಶಿಬಿರಾರ್ಥಿಗಳಿಂದ ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಊರಿನ ಗಣ್ಯಮಾನ್ಯರು, ಹಿರಿಯರು ಅತಿಥಿಗಳಾಗಿ ಭಾಗವಹಿಸಿದರು. ಪ್ರೊಫೆಸರ್ ಲಿಂಗರಾಜ್ ಲಕ್ಷ್ಮೇಶ್ವರ ಅವರು “ಯುವಶಕ್ತಿ ದೇಶದ ಶಕ್ತಿ” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಉಪನ್ಯಾಸ ನೀಡಿದರು.
ನಂತರ ಎನ್ಎಸ್ಎಸ್ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕುರಿತ ಜಾಗೃತಿ ನಾಟಕವನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸೂರೆಗೊಂಡರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರು, ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿಯಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿಗಳಾದ ಪ್ರೊ. ವಾಗೀಶ್ ಚವಡಿ, ಆಕಾಶ್, ಸಂಜು ಅಗಡಿ, ಪ್ರೊ. ಪಲ್ಲವಿ, ಪ್ರೊ. ಅವಿನಾಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಎನ್ಎಸ್ಎಸ್ ವಿದ್ಯಾರ್ಥಿಗಳೇ ನಡೆಸಿಕೊಟ್ಟರು.




