ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗೆ ವಿರೋಧವಾಗಿ ಮುಂಡಗೋಡಿನಲ್ಲಿ ಪ್ರತಿಭಟನೆ.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗೆ ವಿರೋಧವಾಗಿ ಮುಂಡಗೋಡಿನಲ್ಲಿ ಪ್ರತಿಭಟನೆ.
ಮುಂಡಗೋಡ ಜನವರಿ 12:: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಗೆ ( ಮನರೇಗಾ) ತಿದ್ದುಪಡಿ ತಂದು ವಿಬಿ ಜಿ ರಾಮ್ ಜಿ ಕಾಯ್ದೆ ಎಂದು ಮರು ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ತಾಲೂಕ ಚುನಾಯಿತ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟ, ನರೆಗಾ ಕೂಲಿ ಕಾರ್ಮಿಕರ ಸಂಘಟನೆ, ದಲಿತ ಸಂಘರ್ಷ ಸಮಿತಿ, ಯುವರತ್ನ ಯುವ ಒಕ್ಕೂಟ, ರೈತ ಸಂಘಟನಾ ಸಮಿತಿ, ಸಿಸಿಎಪ್ ಜನಸ್ಪೂರ್ತಿ ಮಹಿಳಾ ಒಕ್ಕೂಟ ಮುಂಡಗೋಡ ವತಿಯಿಂದ ಪ್ರತಿಭಟನೆ ನಡೆಸಿದರು.
ಪಟ್ಟಣದ ಐ.ಬಿ.ಯಿಂದ ಸುಮಾರು ಇನ್ನೂರಕ್ಕೂ ಅಧಿಕ ಪ್ರತಿಭಟನಾಕಾರರು ಕೇಂದ್ರ ಸರಕಾರ ಕಾರ್ಮಿಕ ವಿರೋಧ ನೀತಿಯ ವಿರುದ್ದ ಘೋಷಣಾ ವಾಕ್ಯಗಳನ್ನು ಕೂಗುತ್ತ ಶಿವಾಜಿ ಸರ್ಕಲ್ವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಶಿವಾಜಿ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಗ್ರಾಮೀಣ ಕೂಲಿ ಕಾರ್ಮಿಕರ ಬದುಕಿಗೆ ಆಸರೆಯಾಗಿರುವ ಯೋಜನೆಗಳ ಮೇಲೆ ದಾಳಿ ನಡೆಸುವ ಯಾವುದೇ ಕ್ರಮಗಳನ್ನು ಸಹಿಸಲಾಗುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ರಾಜ್ಯ ಸರಕಾರಗಳ ಮೇಲೆ ಆರ್ಥಿಕ ಹೊರೆಯನ್ನು ಹೊರಿಸುವ ದುರುದ್ದೇಶದಿಂದ ಕೂಡಿದ ವಿಬಿ ಜಿ ರಾಮ್ ಜಿ ಬಡವರ ಕೂಲಿಯ ಹಕ್ಕನ್ನು ಕಸಿದುಕೊಳ್ಳುವ ಹಕ್ಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
- ಪ್ರತಿಭಟನೆಯ ಬಳಿಕ ತಹಶೀಲ್ದಾರ ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿಯಲ್ಲಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕು ಹಾಗೂ ನರೆಗಾ ಯೋಜನೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಆಗ್ರಹಿಸಲಾಯಿತು.
ವರದಿ. ವೆಂಕಟೇಶ್ ದಾಸರ




