
ಮುಂಡಗೋಡ: ಮುಂಡಗೋಡ–ಯಲ್ಲಾಪುರ ಮಾರ್ಗದ ಸಮೀಪದ ತಟ್ಟಿಹಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿ ಸುಮಾರು 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗ್ರಾಮದ ಸರ್ವೇ ನಂ. 16 ಮತ್ತು 17ರಲ್ಲಿ ದಿ. ಸಾವಕ್ಕ ಜೀವನ ಅಗಡಿ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಹೊಲದ ಮೇಲ್ಭಾಗದಲ್ಲಿ ಹಾದು ಹೋಗಿರುವ ತ್ರಿಫೇಸ್ ವಿದ್ಯುತ್ ಲೈನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಅದರಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ಜಮೀನಿನ ಮಾಲೀಕರು ತಿಳಿಸಿದ್ದಾರೆ.
ಅಗ್ನಿಯ ತೀವ್ರತೆಯಿಂದ ಒಂದು ಎಕರೆ ಪ್ರದೇಶದಲ್ಲಿ ಬೀಜೋತ್ಪಾದನೆಗಾಗಿ ಬೆಳೆಸಿದ್ದ ಗುಣಮಟ್ಟದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಜೊತೆಗೆ ಸುಮಾರು ಐದು ಎಕರೆ ಪ್ರದೇಶದಲ್ಲಿದ್ದ ಕುಳೆ (ರಟೂನ್) ಕಬ್ಬು ಬೆಳೆಗೂ ಭಾರೀ ಹಾನಿಯಾಗಿದೆ. ನೀರಾವರಿ ವ್ಯವಸ್ಥೆಗೆ ಅಳವಡಿಸಿದ್ದ ಪೈಪ್ಗಳು, ಜೆಟ್ಸೆಟ್ಗಳು ಸೇರಿದಂತೆ ಹಲವು ಕೃಷಿ ಉಪಕರಣಗಳು ಬೆಂಕಿಯಲ್ಲಿ ನಾಶವಾಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಹೊಲದ ಮಧ್ಯಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ಗಳ ಸಮರ್ಪಕ ನಿರ್ವಹಣೆಯ ಕೊರತೆಯೇ ಈ ದುರ್ಘಟನೆಗೆ ಪ್ರಮುಖ ಕಾರಣವೆಂದು ಮಾಲೀಕರು ಆರೋಪಿಸಿದ್ದಾರೆ. ಕೈಗೆ ಬಂದ ಬೆಳೆ ಕ್ಷಣಾರ್ಧದಲ್ಲಿ ಭಸ್ಮವಾಗಿರುವುದರಿಂದ ರೈತ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.
ಸಂಬಂಧಪಟ್ಟ ವಿದ್ಯುತ್ ಇಲಾಖೆ ಹಾಗೂ ಆದಾಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಸಮಗ್ರ ಪರಿಶೀಲನೆ ನಡೆಸಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದ್ದಾರೆ.




